ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವಾಗದಿರಲಿ: ರೆಡ್ಡಿ ಶ್ರೀನಿವಾಸ್
ರಾಜ್ಯ ಸರ್ಕಾರವು ಸರ್ವರಿಗೂ ಸಮಬಾಳು ಸಮಪಾಲು ತತ್ವದಡಿ ಅನುಷ್ಠಾನಗೊಳಿಸಲಾಗಿದೆ

ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರವಾಗದಿರಲಿ: ರೆಡ್ಡಿ ಶ್ರೀನಿವಾಸ್
ಕೊಪ್ಪಳ:ಸತ್ಯ ಮಿಥ್ಯ (ಜೂನ್ 21).
ರಾಜ್ಯ ಸರ್ಕಾರ ಮಹತ್ವದ ಕಾರ್ಯಕ್ರಮಗಳಾದ ಗ್ಯಾರಂಟಿ ಯೋಜನೆಗಳು ಜನಪರ ಯೋಜನೆಗಳಾಗಿದ್ದು ಇವುಗಳ ಬಗ್ಗೆ ಯಾವುದೇ ರೀತಿಯ ಅಪಪ್ರಚಾರವಾಗದಂತೆ ನೋಡಿಕೊಳ್ಳಿ ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಸರ್ವರಿಗೂ ಸಮಬಾಳು ಸಮಪಾಲು ನೀಡಬೇಕೆಂಬ ಉದ್ದೇಶದಿಂದ ಜಾರಿಗೆ ತಂದ ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿದ್ದು, ಇವುಗಳು ಸಮರ್ಪಕ ಅನುಷ್ಠಾನವಾಗುತ್ತಿವೆ.
ತಾಂತ್ರಿಕ ದೋಷಗಳಿಂದಾಗಿ ಕೆಲವರಿಗೆ ಯೋಜನೆಗಳು ಸರಿಯಾಗಿ ತಲುಪುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಈ ಸಮಸ್ಯೆಯನ್ನು ಬಗೆಹರಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭವನ್ನು ದೊರಕಿಸಿಕೊಡಬೇಕು.
ಗ್ಯಾರಂಟಿ ಯೋಜನೆಗಳು ನಿಲ್ಲಿಸುತ್ತಾರೆ ಎಂದು ಜನಸಾಮನ್ಯರಿಗೆ ಯಾವುದೇ ತಪ್ಪು ಮಾಹಿತಿ ಹೋಗಬಾರದು. ಈ ಹಿನ್ನಲೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆಗೆ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.
ಗೃಹಲಕ್ಷ್ಮೀ ಯೋಜನೆಯಡಿ ಅರ್ಜಿ ಸಲ್ಲಿಸಿದ ಕೆಲವು ಫಲಾನುಭವಿಗಳಿಗೆ ಸಹಾಯಧನ ಮೊತ್ತ ಜಮೆ ಆಗುವುದರ ಬಗ್ಗೆ ದೂರುಗಳು ಬರುತ್ತಿವೆ. ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಆಗದೆ ಇರುವುದು ಮತ್ತು ಇತರ ಸಣ್ಣಪುಟ್ಟ ಸಮಸ್ಯೆಗಳಿಂದಾಗಿ ಫಲಾನುಭವಿಗಳಿಗೆ ಸೌಲಭ್ಯ ಸಿಗುತ್ತಿಲ್ಲ. ಅನ್ನಭಾಗ್ಯ ಯೋಜನೆಯಡಿ ವಯೋವೃದ್ಧರ ಹೆಬ್ಬೆರಳಿನ ಗುರುತಿನ ಸಮಸ್ಯೆಯಿಂದಾಗಿ ಕೆಲವರಿಗೆ ಈ ಯೋಜನೆಯಡಿ ಆಹಾರ ಧಾನ್ಯಗಳು ಸಿಗುತಿಲ್ಲ.
ಈ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಪರ್ಯಾಯ ವ್ಯವಸ್ಥೆ ಕೈಗೊಂಡು ಎಲ್ಲರಿಗೂ ಸೌಲಭ್ಯ ನೀಡಬೇಕು. ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಕಡ್ಡಾಯವಾಗಿ ನಾಮಫಲಕ ಅಳವಡಿಸಬೇಕು ಹಾಗೂ ಪಡಿತರ ಕಾರ್ಡ್ನಲ್ಲಿರುವ ಪ್ರತಿ ಸದಸ್ಯರಿಗೆ ನೀಡುವ ಆಹಾರ ಸಾಮಾಗ್ರಿಗಳ ವಿವರವನ್ನು ಸಹ ಸೂಚನಾ ಫಲಕದಲ್ಲಿ ಅಳವಡಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಿಕೊಂಡ 3,17,000 ಮಹಿಳೆಯರ ಪೈಕಿ ಮೇ ತಿಂಗಳ ಯವರೆಗೆ 3,08,510 ಫಲಾನುಭವಿಗಳಿಗೆ ಯೋಜನೆಯ ಮೊತ್ತವನ್ನು ಬಿಡುಗಡೆ ಮಾಡಲಾಗಿದ್ದು, ಶೇ.97ರಷ್ಟು ಪ್ರಗತಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಶಕ್ತಿ ಯೋಜನೆಯಡಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಗಳಲ್ಲಿ ಇಲ್ಲಿಯವರೆಗೆ ಜಿಲ್ಲೆಯಲ್ಲಿ 3.8 ಕೋಟಿ ಮಹಿಳೆಯರು ಉಚಿತ ಪ್ರಮಾಣ ಮಾಡಿದ್ದು, ಶೇ.57ರಷ್ಟು ಪ್ರಗತಿಯಾಗಿದೆ ಎಂದು ಕೆ.ಕೆ.ಆರ್.ಟಿ.ಸಿ ಕೊಪ್ಪಳ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದರು.
ಕೊಪ್ಪಳ ಜಿಲ್ಲೆಯಲ್ಲಿ 2,89,000 ವಿದ್ಯುತ್ ಗ್ರಾಹಕರ ಪೈಕಿ ಗೃಹಜ್ಯೋತಿ ಯೋಜನೆಯಡಿ 2,72,000 ಕ್ಕೂ ಅಧಿಕ ನೋಂದಣಿಯಾಗಿದ್ದು, 1,82,532 ಫಲಾನುಭವಿಗಳು ಈ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ. ಗೃಹಜ್ಯೋತಿಯಡಿ ಜಿಲ್ಲೆಯಲ್ಲಿ ಶೇ.94ರಷ್ಟು ಪ್ರಗತಿಯಾಗಿದೆ ಎಂದು ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಮಾಹಿತಿ ನೀಡಿದರು.
ಅನ್ನಭಾಗ್ಯ ಯೋಜನೆಯಡಿ 3,27,110 ಬಿಪಿಎಲ್ ಕುಟುಂಬಗಳಿದ್ದು, ಇದರಲ್ಲಿ 3,04,215 ಬಿ.ಪಿ.ಎಲ್ ಕುಟುಂಬಗಳಿಗೆ ಪ್ರತಿ ಮಾಹೆಯಲ್ಲಿ 5 ಕೆ.ಜಿ ಅಕ್ಕಿ ಮತ್ತು ಹೆಚ್ಚುವರಿ 5 ಕೆ.ಜಿ ಅಕ್ಕಿಯ ಮೊತ್ತವನ್ನು ಕುಟುಂಬದ ಮುಖ್ಯಸ್ಥರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಯುವನಿಧಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ಪದವಿ ಹಾಗೂ ಡಿಪ್ಲೋಮಾ ಪದವಿ ಪೂರ್ಣಗೊಳಿಸಿದ 4,600 ಅಭ್ಯರ್ಥಿಗಳ ಪೈಕಿ 4,502 ಜನರು ನೋಂದಾಯಿಸಿಕೊಂಡಿದ್ದು, ಮೇ ತಿಂಗಳ ವರೆಗೆ 1,752 ನಿರುದ್ಯೋಗಿ ಯುವಕರಿಗೆ ಸಹಾಯಧನ ಮೊತ್ತವನ್ನು ಜಮೆ ಮಾಡಲಾಗಿದೆ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ. ಕಡಿ ಸೇರಿದಂತೆ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು, ಸದಸ್ಯರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸಹಾಗೂ ತಾ.ಪಂ ಇಒ ಗಳು ಉಪಸ್ಥಿತರಿದ್ದರು
ವರದಿ : ಎಸ್. ಎ. ಹಿರೇಮಠ್.