ಜುಲೈ 13 ಕ್ಕೆ ರಾಷ್ಟ್ರೀಯ ಲೋಕ ಅದಾಲತ್ ಪ್ರಕರಣಗಳ ತ್ವರಿತ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶ: ಪ್ರಧಾನ ನ್ಯಾಯಾಧೀಶರು ಬಸವರಾಜ.
ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶ.

ಜುಲೈ 13 ಕ್ಕೆ ರಾಷ್ಟ್ರೀಯ ಲೋಕ ಅದಾಲತ್ ಪ್ರಕರಣಗಳ ತ್ವರಿತ ಇತ್ಯರ್ಥಪಡಿಸಿಕೊಳ್ಳಲು ಸುವರ್ಣ ಅವಕಾಶ: ಪ್ರಧಾನ ನ್ಯಾಯಾಧೀಶರು ಬಸವರಾಜ್
ಗದಗ :ಸತ್ಯಮಿಥ್ಯ (ಜು -04)
ಜಿಲ್ಲೆಯಲ್ಲಿ ಜುಲೈ 13 ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಸುವರ್ಣಾವಕಾಶ ಒದಗಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಿಳಿಸಿದರು.
ಜಿಲ್ಲಾ ನ್ಯಾಯಾಲಯದ ವಿಡಿಯೋ ಕಾನ್ಪರನ್ಸ ಹಾಲ್ನಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕಕ್ಷಿದಾರರ ಹಿತರಕ್ಷಣೆಗೆ ಲೋಕ ಅದಾಲತ್ ಅತ್ಯುತ್ತಮ ಸಾಧನವಾಗಿದೆ ಎಂದರು. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಪೋಲಾಗುವ ಸಮಯದ ಭಾರ ತಪ್ಪಿಸಲು, ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿಯ ಸೌಲಭ್ಯ ಪಡೆದುಕೊಳ್ಳಲು ಸಹಾಯಕವಾಗಲಿದೆ ಎಂದರು. ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಇರದೆ ಇರುವುದರಿಂದ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು.
ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 16 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 20,130 ವಿವಿಧ ಚಾಲ್ತಿ ಪ್ರಕರಣಗಳಿದ್ದು, ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 4,297 ಪ್ರಕರಣಗಳನ್ನು ಗುರುತಿಸಿದ್ದು, ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆ ಪ್ರಕರಣಗಳು, ಚೆಕ್ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ ಎಂದರು. ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನವೊಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಈಗಾಗಲೇ ಸಂಬಂಧಪಟ್ಟ ಇಲಾಖೆಯ ಹಾಗೂ ನಿಗಮ ಮಂಡಳಿಗಳ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ಜರುಗಿಸಿ ಹೆಚ್ಚಿನ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಲು ತಿಳಿಯಪಡಿಸಿದೆ. ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿಧ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಜುಲೈ 13 ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬೇಕೆಂದರು. ಜಿಲ್ಲೆಗೆ ಸಂಬಂಧಿಸಿದ ಅಪಘಾತ ಪರಿಹಾರ, ಜೀವನಾಂಶ, ಚೆಕ್ ಬೌನ್ಸ್ ಸೇರಿದಂತೆ ಇತರೆ ಒಟ್ಟು 14 ಪ್ರಕರಣಗಳು ಸರ್ವೋಚ್ಛ ನ್ಯಾಯಾಲಯದಲ್ಲಿ ಇವೆ. ಇವುಗಳನ್ನು ಸಹ ಲೋಕ ಅದಾಲತ್ನಲ್ಲಿ ರಾಜಿಗೆ ಪರಿಗಣಿಸಲಾಗಿದೆ ಎಂದರು. ಕಳೆದ ಮಾರ್ಚ-2024 ರಂದು ಜರುಗಿದ ಲೋಕ ಅದಾಲತ್ನಲ್ಲಿ 2,033 ಚಾಲ್ತಿ ಪ್ರಕರಣಗಳನ್ನು ಹಾಗೂ 21,387 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 23,420 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 16 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ ಎಂದರು. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ , ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ವಸಂತ ಮಡ್ಲೂರ ಉಪಸ್ಥಿತರಿದ್ದರು.
ವರದಿ : ಮುತ್ತು.